ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ದಿಢೀರ್ ದೆಹಲಿಗೆ ತೆರಳಿದ್ದು, ಸಾಕಷ್ಟು ಕುತೂಹಲವನ್ನು ಮೂಡಿಸಿದೆ.
ದೆಹಲಿಗೆ ಭೇಟಿ ನೀಡಿರುವ ಬೊಮ್ಮಾಯಿಯವರು ಇಂದು ರಾಷ್ಟ್ರೀಯ ನಾಯಕ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆಂದು ಹೇಳಲಾಗುತ್ತಿದ್ದು, ದಾವೋಸ್'ಗೆ ಭಾನುವಾರ ತೆರಳುವ ಹಿನ್ನೆಲೆಯಲ್ಲಿ ಶುಕ್ರವಾರ ತಾವಾಗಿಯೇ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡಲು ಮುಖ್ಯಮಂತ್ರಿಗಳು ನಿರ್ಧರಿಸಿದ್ದರು ಹೇಳಲಾಗುತ್ತಿದೆ.
ಮುಖ್ಯಮಂತ್ರಿಗಳು ದೆಹಲಿಗೆ ಭೇಟಿ ನೀಡಿರುವ ಹಿನ್ನೆಲೆಯಲ್ಲಿ ಸಚಿವಾಕಾಂಕ್ಷಿಗಳಲ್ಲಿ ಆಸೆಗಳು ಗರಿಗೆದರಿವೆ. ಆದರೆ, ರಾಜ್ಯದಲ್ಲಿ ಸಾಲು ಸಾಲು ಚುನಾವಣೆಗಳು ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಈ ಹಂತದಲ್ಲಿ ಅನಗತ್ಯ ಗೊಂದಲಗಳು ಸೃಷ್ಟಿಯಾಗುವುದನ್ನು ಇಚ್ಛಿಸದ ಬಿಜೆಪಿ ಹೈಕಮಾಂಡ್ ಸದ್ಯಕ್ಕೆ ಸಂಪುಟ ವಿಸ್ತರಣೆ/ಪುನಾರಚನೆಗೆ ಗ್ರೀನ್ ಸಿಗ್ನಲ್ ನೀಡದಿರಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಈಗಾಗಲೇ ರಾಜ್ಯಸಭೆಯ 4 ಸ್ಥಾನ, ವಿಧಾನಸಭೆಯಿಂದ ವಿಧಾನಪರಿಷತ್ತಿನ 7 ಸ್ಥಾನ ಹಾಗೂ ಪರಿಷತ್ತಿನ 2 ಪದವೀಧರ ಮತ್ತು 2 ಶಿಕ್ಷ ಕ್ಷೇತ್ರಗಳ ಚುನಾವಣೆ ಈಗ ಘೋಷಣೆಯಾಗಿದೆ. ಇದೇ ವೇಳೆ ಮುಂದಿನ 8 ವಾರಗಳಲ್ಲಿ ಕ್ಷೇತ್ರಗಳ ಪುನರ್ ವಿಂಗಡಣೆ ಮತ್ತು ಮೀಸಲಾತಿ ನಿಗದಿಪಡಿಸಿ ಬಿಬಿಎಂಪಿ ಚುನಾವಣೆ ಪ್ರಕ್ರಿಯೆ ನಡೆಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ಇಷ್ಟರಲ್ಲೇ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಘೋಷಣೆ ಬಗ್ಗೆಯೂ ಸ್ಪಷ್ಟ ಚಿತ್ರಣ ಹೊರಬೀಳುವ ಸಾಧ್ಯತೆಗಳಿವೆ. ಹೀಗಿರುವಾಗ ಸಂಪುಟ ಸರ್ಜರಿ ಕೈಗೊಂಡು ಅದರಿಂದ ಉಂಟಾಗಬಹುದಾದ ಭಿನ್ನಮತವನ್ನು ಆಡಳಿತಾರೂಢ ಬಿಜೆಪಿ ಮೈಮೇಲೆ ಎಳೆದುಕೊಳ್ಳಲು ಇಚ್ಛಿಸುತ್ತಿಲ್ಲ ಎಂದು ಹೇಳಲಾಗುತ್ತಿದೆ.
ಈ ನಡುವೆ ಸಚಿವಾಕಾಂಕ್ಷಿಗಳ ಪಟ್ಟಿಯಲ್ಲಿ ಮೊದಲಿರುವ ರಮೇಶ್ ಜಾರಕಿಹೊಳಿಯವರು ಈಗಾಗಲೇ ದೆಹಲಿಗೆ ಭೇಟಿ ನೀಡಿದ್ದು, ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದಾರೆ. ಆದರೆ, ಈ ಬಾರಿಯ ಸಂಪುಟ ವಿಸ್ತರಣೆ ವೇಳೆ ಜಾರಕಿಹೊಳಿ ಸೇರ್ಪಡೆಗೊಳಿಸಲು ಕೇಂದ್ರ ಬಿಜೆಪಿ ಇಚ್ಛಿಸುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.
ಇನ್ನು ಶುಕ್ರವಾರ ದೆಹಲಿಗೆ ತೆರಳಿದ ಬೊಮ್ಮಾಯಿ ಅವರು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಮತ್ತು ವಿಧಾನಸಭೆಯಿಂದ ವಿಧಾನಪರಿಷತ್ತಿನ ಏಳು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಈ ಪೈಕಿ ವಿಧಾನಸಭೆಯ ಪಕ್ಷದ ಸಂಖ್ಯಾಬಲದ ಆಧಾರದ ಮೇಲೆ ಬಿಜೆಪಿಗೆ ರಾಜ್ಯಸಭೆಯ ಎರಡು ಸ್ಥಾನ ಮತ್ತು ವಿಧಾನಪರಿಷತ್ತಿನ ನಾಲ್ಕು ಸ್ಥಾನಗಳು ಲಭ್ಯವಾಗಲಿವೆ.
ಈ ಸಂಬಂಧ ಈಗಾಗಲೇ ಪಕ್ಷದ ರಾಜ್ಯ ನಾಯಕರನ್ನು ಒಳಗೊಂಡ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ಕೇಂದ್ರ ಘಟಕಕ್ಕೆ ಹೆಸರುಗಳನ್ನು ಶಿಫಾರಸು ಮಾಡಲಾಗಿದೆ. ರಾಜ್ಯಸಭೆಯ ಎರಡು ಸ್ಥಾನಗಳಿಗೆ ಐದು ಹೆಸರುಗಳು ಮತ್ತು ವಿಧಾನಪರಿಷತ್ತಿನ ನಾಲ್ಕು ಸ್ತಾನಗಳಿಗೆ 20 ಹೆಸರುಗಳನ್ನು ಅಂತಿಮಗೊಳಿಸಿ ಕಳುಹಿಸಲಾಗಿದೆ. ಅವುಗಳಲ್ಲಿ ಅಂತಿಮವಾಗಿ ಯಾರಿಗೆ ಟಿಕೆಟ್ ನೀಡಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ತೀರ್ಮಾನಿಸಲಿದೆ. ಆ ತೀರ್ಮಾನಕ್ಕೂ ಮೊದಲು ಮುಖ್ಯಮಂತ್ರಿಗಳೊಂದಿಗೆ ವರಿಷ್ಠರು ಚರ್ಚಿಸಲಿದ್ದಾರೆ ಎನ್ನಲಾಗಿದೆ.
ನಿನ್ನೆ ದೆಹಲಿಗೆ ಭೇಟಿ ನೀಡಿದ ಬೊಮ್ಮಾಯಿಯವರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಲು ಸಾಧ್ಯವಾಗಿಲ್ಲ. ಜೆ.ಪಿ ನಡ್ಡಾ ಅವರು ದೆಹಲಿಯಲ್ಲಿ ಇಲ್ಲದ ಕಾರಣ ಭೇಟಿ ಮಾಡಲು ಸಾಧ್ಯವಾಗಿಲ್ಲ. ಇದು ಸಂಪುಟ ವಿಸ್ತರಣೆ ಗ್ರೀನ್ ಸಿಗ್ನಲ್ ನೀಡಲು ಹೈಕಮಾಂಡ್ ಇಚ್ಛಿಸದಿರುವ ಸೂಚನೆಗಳನ್ನು ನೀಡಿದೆ.
ಇಂದು ಅಮಿತ್ ಶಾ ಅವರನ್ನು ಬೊಮ್ಮಾಯಿ ಅವರು ಭೇಟಿ ಮಾಡಲಿದ್ದು, ಈ ವೇಳೆ ಸಂಪುಟ ವಿಸ್ತರಣೆಗೆ ಒತ್ತಾಯಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ. ಆದರೆ, ಇದಕ್ಕೆ ಅಮಿತ್ ಶಾ ಅವರು ಒಪ್ಪಿಗೆ ನೀಡದಿರಬಹುದು ಎಂದು ಮೂಲಗಳು ತಿಳಿಸಿವೆ.
ಇತ್ತೀಚೆಗಷ್ಟೇ ಅಮಿತ್ ಶಾ ಅವರು ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲೂ ಈ ವಿಚಾರವನ್ನು ಮುಖ್ಯಮಂತ್ರಿಗಳು ಪ್ರಸ್ತಾಪಿಸಿದ್ದರು. ಆದರೆ, ಆಗಲೂ ಈ ಬಗ್ಗೆ ಶಾ ಅವರು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ ಎನ್ನಲಾಗಿದೆ.
10 ತಿಂಗಳುಗಳಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಎದುರಾಗುತ್ತಿದ್ದು, ಸಚಿವಾಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದೆ, ಸಚಿವ ಸಂಪುಟ ವಿಸ್ತರಣೆ ಮಾಡುವಂತೆ ಮುಖ್ಯಮಂತ್ರಿಗಳ ಬಸವರಾಜ ಬೊಮ್ಮಾಯಿಯವರಿಗೆ ರಾಜ್ಯ ಘಟಕದಿಂದಲೇ ಒತ್ತಡ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ.
(KANNADA PRABHA)