ಬೆಂಗಳೂರು: ಭಜರಂಗ ದಳದ ಕಾರ್ಯಕರ್ತ ಹರ್ಷ ಅವರ ಭೀಕರ ಹತ್ಯೆ ಪ್ರಕರಣ ಶಿವಮೊಗ್ಗ ಜಿಲ್ಲೆಯಲ್ಲಿ ವ್ಯಾಪಕ ಹಿಂಸಾಚಾರಕ್ಕೆ ದಾರಿ ಮಾಡಿಕೊಡುತ್ತಿದ್ದಂತೆಯೇ ಇತ್ತ ಪ್ರಕರಣ ಸಂಬಂಧ ಸೋಮವಾರ ವಿಧಾನಸೌಧದ ಒಳಗೆ ಹಾಗೂ ಹೊರಗೆ ಸೋಮವಾರ ರಾಜಕೀಯ ಕೆಸರೆರಚಾಟ ಆರಂಭಗೊಂಡಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ಕಾಂಗ್ರೆಸ್ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ಆರಂಭಿಸಿದ್ದು, ಇದಕ್ಕೆ ಬಿಜೆಪಿ ನಾಯಕರೂ ಕೂಡ ಪ್ರತಿದಾಳಿ ನಡೆಸಿದರು. ಇದರಿಂದಾಗಿ ಸದನದಲ್ಲಿ ಭಾರೀ ಗದ್ದಲವುಂಟಾಗಿತ್ತು.
ಘಟನೆ ಸಂಬಂಧ ಸದನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಭಾನುವಾರ ರಾತ್ರಿಯೇ ಕೊಲೆ ಪ್ರಕರಣದ ತನಿಖೆ ಆರಂಭವಾಗಿದೆ ಎಂದು ಹೇಳಿದರು.
ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಾಗುತ್ತದೆ. ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಬಳಿಕ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ ಅವರು, ಇಂತಹ ಅಪರಾಧಗಳನ್ನು ಸರ್ಕಾರ ಸಹಿಸುವುದಿಲ್ಲ ಎಂಬ ಸಂದೇಶ ರವಾನಿಸಲು ಕೊಲೆಯಲ್ಲಿ ಭಾಗಿಯಾದವರಿಗೆ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.
ಈ ವೇಳೆ ಮಾತನಾಡಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ವಿಫಲವಾಗಿದೆ, ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.
ಸಂಘಟನೆ ಅಥವಾ ಸಮುದಾಯದ ಬೇಧವಿಲ್ಲದೆ ಹರ್ಷನನ್ನು ಕೊಂದವರನ್ನು ಗಲ್ಲಿಗೇರಿಸಬೇಕು. ರಾಜ್ಯದಲ್ಲಿ ಪರಿಸ್ಥಿತಿ ಹದಗೆಟ್ಟಿದೆ ಮತ್ತು ಕಾನೂನು ಸುವ್ಯವಸ್ಥೆ ಸರಿಯಿಲ್ಲ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ಈ ಘಟನೆ ನಡೆದಿದೆ. ಆರಗ ಜ್ಞಾನೇಂದ್ರ ಅವರು ಗೃಹ ಸಚಿವರಾಗಿ ಕಾರ್ಯನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ. ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮಾತನಾಡಿ, ಹರ್ಷ ಹತ್ಯೆಯನ್ನು ಖಂಡಿಸಿದರು. ಬಳಿಕ ಗೃಹ ಸಚಿವರು ಹಾಗೂ ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಸರ್ಕಾರ ಸತ್ಯವನ್ನು ಬಹಿರಂಗಪಡಿಸಬೇಕು ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಕೆಲಸ ಮಾಡಬೇಕು" ಎಂದು ಅವರು ಒತ್ತಿ ಹೇಳಿದರು.
ಈ ವಿಚಾರ ವಿಧಾನಮಂಡಲದಲ್ಲೂ ಪ್ರತಿಧ್ವನಿಸಿದ್ದು, ಹತ್ಯೆಗೆ ಪರೋಕ್ಷವಾಗಿ ಈಶ್ವರಪ್ಪ ಕಾರಣ ಎಂದು ಪರಿಷತ್ ಪ್ರತಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ಆರೋಪಿಸಿದರು.
ಘಟನೆಯ ಬಗ್ಗೆ ಈಶ್ವರಪ್ಪ ಅವರಿಗೆ ವಿವರವಾಗಿ ತಿಳಿದಿತ್ತು. ಹೀಗಾಗಿ ಘಟನೆಗೆ ಪರೋಕ್ಷವಾಗಿ ಅವರು ಕಾರಣರಾಗಿದ್ದಾರೆ ಎಂದು ಆರೋಪಿಸಿದರು.
ಯುವಕನ ಕೊಲೆ ಸಂಬಂಧ ಪೊಲೀಸ್ ತನಿಖೆ ನಡೆಯುವ ಮುನ್ನವೇ ಈಶ್ವರಪ್ಪ ಅವರು, ಮುಸ್ಲಿಂ ಗೂಂಡಾಗಳು ಕೊಲೆಗೆ ಕಾರಣ ಎಂದು ಹೇಳಿರುವುದನ್ನು ನೋಡಿದರೆ, ಅವರಿಗೆ ಎಲ್ಲ ಬಗೆಯ ಮಾಹಿತಿ ಮೊದಲೇ ಗೊತ್ತಿತ್ತು ಎಂದು ಕಾಣುತ್ತದೆ. ಘಟನೆ ಬಗ್ಗೆ ಗೃಹ ಸಚಿವರು ಹೇಳಿಕೆ ನೀಡಬೇಕಿತ್ತು, ಘಟನೆ ಬಗ್ಗೆ ಪೊಲೀಸ್ ತನಿಖೆ ನಡೆಯದೇ ಈಶ್ವರಪ್ಪ ಅವರು ಈ ರೀತಿ ಹೇಳಿಕೆ ನೀಡಿದ್ದಾರೆ, ಅವರಿಗೆ ಬಹುಶಃ ಸಂಪೂರ್ಣ ಮಾಹಿತಿ ಇತ್ತೆಂದು ಕಾಣುತ್ತದೆ ಎಂದು ಹೇಳಿದರು.
ಹರಿಪ್ರಸಾದ್ ಅವರ ಈ ಮಾತಿನಿಂದ ಸಿಟ್ಟಿಗೆದ್ದ ಬಿಜೆಪಿ ಸದಸ್ಯರು ಒಟ್ಟಿಗೆ ಎದ್ದು ಆಕ್ರೋಶ ವ್ಯಕ್ತಪಡಿಸತೊಡಗಿದರು. ಆಡಿರುವ ಮಾತನ್ನು ಕಡತದಿಂದ ತೆಗೆಯಬೇಕು ಎಂದು ಸಭಾಪತಿಗಳಿಗೆ ಮನವಿ ಮಾಡಿದರು. ಈ ವೇಳೆ ಗದ್ದಲದ ವಾತಾವರಣ ನಿರ್ಮಾಣವಾಗಿತ್ತು.
ಹರ್ಷ ಕೊಲೆ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಜೆಡಿಎಸ್ ನಾಯಕ ಎಚ್ಡಿ ಕುಮಾರಸ್ವಾಮಿ ಮಾತನಾಡಿ, ಪರಿಸ್ಥಿತಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ಗುಪ್ತಚರ ವೈಫಲ್ಯವೇ ಕಾರಣ ಎಂದು ಹೇಳಿದ್ದಾರೆ.
ಶಿವಕುಮಾರ್ ಅವರ ಹೇಳಿಕೆ ಆರೋಪಿಗಳನ್ನು ಕೆರಳಿಸಿದೆ ಎಂಬ ಮಾಹಿತಿ ಈಶ್ವರಪ್ಪ ಅವರಿಗಿದ್ದರೆ, ಘಟನೆಯನ್ನು ತಡೆಯಲು ಏಕೆ ಪೂರ್ವಭಾವಿ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು. "ಎರಡೂ ರಾಷ್ಟ್ರೀಯ ಪಕ್ಷಗಳು ಸಾಮಾಜಿಕ ಸಾಮರಸ್ಯವನ್ನು ಪಣಕ್ಕಿಟ್ಟು ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುತ್ತಿವೆ ಎಂದು ತಿಳಿಸಿದರು.
ಯುಟಿ ಖಾದರ್ ಅವರು ಮಾತನಾಡಿ. ಶಿವಮೊಗ್ಗದಲ್ಲಿ ನಡೆಯುತ್ತಿರುವ ಅಶಾಂತಿಗೆ ಆರ್ಡಿಪಿಆರ್ ಸಚಿವರೇ ಕಾರಣವಾಗಿದ್ದು, ಸಮುದಾಯದವರ ವಿರುದ್ಧ ಆಧಾರರಹಿತ ಆರೋಪ ಮಾಡಿದ್ದಾರೆ’ ಎಂದು ಆರೋಪಿಸಿದರು. ‘ತನಿಖೆಯಲ್ಲಿ ಆರೋಪಿಗಳು ತಪ್ಪಿತಸ್ಥರೆಂದು ಸಾಬೀತಾದರೆ ಗಲ್ಲು ಶಿಕ್ಷೆ ನೀಡಿ’ ಎಂದು ಇದೇ ವೇಳೆ ಗುಡುಗಿದರು.
ಏತನ್ಮಧ್ಯೆ, ವಿಶ್ವ ಹಿಂದೂ ಪರಿಷತ್ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆರ್ಎಸ್ಎಸ್ ಆಗ್ರಹಿಸಿದೆ.
(KANNADA PRABHA)